ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ವು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಯಥಾವತ್ತಾಗಿ ಮುಂದುವರಿಸಿದ್ದು, ಕರ್ನಾಟಕವು ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ಆದೇಶಿಸಿದೆ.
CWRC ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ನಡೆದ CWMA ಸಭೆಯಲ್ಲಿ ರಾಜ್ಯದ ಪರವಾಗಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ವಾದ ಮಂಡಿಸಿ, ರಾಜ್ಯದಲ್ಲಿ ತೀವ್ರ ಮಳೆಯ ಕೊರತೆ ಇರುವುದರಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿದೆ ಎಂದು ವಿವರಿಸಿದರು.
ಈ ವರ್ಷ ಕಾವೇರಿ ಜಲಾಶಯಗಳಲ್ಲಿ ಕೇವಲ 36.69 ಟಿಎಂಸಿ ನೀರು ಮಾತ್ರ ಲಭ್ಯವಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 99 ಟಿಎಂಸಿ ನೀರು ಸಂಗ್ರಹವಾಗಿತ್ತು. ಬಿಳಿಗುಂಡ್ಲು ಗೇಜ್ ಕೇಂದ್ರದಲ್ಲಿ ಹರಿವಿನ ಪ್ರಮಾಣವೂ ಕಳೆದ ವರ್ಷದ 30,748 ಕ್ಯೂಸೆಕ್ನಿಂದ ಈ ಬಾರಿ ಕೇವಲ 178 ಕ್ಯೂಸೆಕ್ಗೆ ಇಳಿದಿದೆ ಎಂದು ರಾಜ್ಯ ಸರ್ಕಾರ ಗಮನ ಸೆಳೆಯಿತು.
ಅಲ್ಲದೆ, ಬಿಳಿಗುಂಡ್ಲುವಿನಲ್ಲಿ 3,500 ಕ್ಯೂಸೆಕ್ ಹರಿವು ಕಾಯ್ದುಕೊಳ್ಳಲು ಜಲಾಶಯಗಳಿಂದ ಅದಕ್ಕಿಂತ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಪ್ರಸ್ತುತ ಬರ ಪರಿಸ್ಥಿತಿಯಲ್ಲಿ ಇದು ಸಾಧ್ಯವಿಲ್ಲ ಎಂದು ಕರ್ನಾಟಕ ವಾದಿಸಿತು.
ಆದರೆ ರಾಜ್ಯದ ವಾದವನ್ನು ಪರಿಗಣಿಸದ CWMA, CWRC ಆದೇಶವನ್ನೇ ಎತ್ತಿಹಿಡಿದು, ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಅಂತಿಮ ನಿರ್ದೇಶನ ನೀಡಿದೆ.
ಈ ತೀರ್ಮಾನದಿಂದ ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ಕುರಿತ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆ ಇದೆ.






