ಬೆಂಗಳೂರು, ಜೂನ್-10: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೈಗೊಳ್ಳಲಾಗುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2025 (Special Intensive Revision – SIR) ಕುರಿತು ಇಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೋಮ್ಮಲ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತರು, ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ Booth Level Officers (BLOs) ಗಳಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ತಮ್ಮ Booth Level Agents (BLAs) ಗಳ ಪಟ್ಟಿಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಮನವಿ ಮಾಡಿದರು ಹಾಗೂ ರಾಜಕೀಯ ಪಕ್ಷಗಳು ನೇಮಕ ಮಾಡುವ BLA ಗಳು BLO ಗಳೊಂದಿಗೆ SIR ಪ್ರಕ್ರಿಯೆಯಲ್ಲಿ ಸಮನ್ವಯ ಸಾಧಿಸಿಕೊಂಡು ಪ್ರಕ್ರಿಯೆ ಪಾರದರ್ಶಕತೆಯಿಂದ ನಿರ್ವಹಿಸಲು ಸಹಕರಿಸುವಂತೆ ಕೋರಿದರು.
ಯಶಸ್ವಿ, ಪಾರದರ್ಶಕ ಹಾಗೂ ವಿಶ್ವಾಸಾರ್ಹ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗಾಗಿ ಕರ್ತವ್ಯ ನಿರತ ಅಧಿಕಾರಿಗಳು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಪಾಲಿಕೆಯ ಅಧಿಕಾರಿಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಸಮಾನ ಆದ್ಯತೆ ನೀಡಬೇಕು. ಯಾವುದೇ ರೀತಿಯ ಪಕ್ಷಪಾತ ಅಥವಾ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ Enumeration Form, BLO ಹಾಗೂ BLAಗಳ ಕರ್ತವ್ಯಗಳು, ಮತದಾರರ ಮಾಹಿತಿ ಸಂಗ್ರಹಣೆ, ದಾಖಲೆಗಳ ಪರಿಶೀಲನೆ ಹಾಗೂ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವಿಧಾನದ ಕುರಿತು ವಿಸ್ತೃತ ಚರ್ಚೆ ನಡೆಯಿತು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಆಯುಕ್ತರು ಸ್ಪಷ್ಟನೆ ನೀಡಿದರು. ಅಲ್ಲದೆ, ಪಕ್ಷಗಳ ಪ್ರತಿನಿಧಿಗಳು ನೀಡಿದ ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ದಾಖಲಿಸಿಕೊಂಡು ಮುಂದಿನ ಕ್ರಮಗಳಲ್ಲಿ ಪರಿಗಣಿಸಲಾಗುವುದು ಎಂದು ತಿಳಿಸಲಾಯಿತು.
SIR ಕಾರ್ಯದಲ್ಲಿ ಭಾಗವಹಿಸಲಿರುವ BLOಗಳು ಹಾಗೂ ಇತರೆ ಅಧಿಕಾರಿಗಳಿಗೆ ಹಂತ ಹಂತವಾಗಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಅಪರ ಆಯುಕ್ತರಾದ (ಕಂದಾಯ – ಪ್ರಭಾರ) ಶ್ರೀಮತಿ ಪಲ್ಲವಿ, ಉಪ ಆಯುಕ್ತರಾದ ಶ್ರೀ ಸೋಮಶೇಖರ್, ಬೆಂಗಳೂರು ಉತ್ತರ ವ್ಯಾಪ್ತಿಯ ಮತದಾರ ನೋಂದಣಾಧಿಕಾರಿಗಳು, ಸಹಾಯಕ ಮತದಾರ ನೋಂದಣಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು.






